ಶಿವಮೊಗ್ಗ: ಮರಳು ಲಾರಿಗಳಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಹಾಕಿದ್ದ ಸವಾಲು ಸ್ವೀಕರಿಸಿದ ಹರತಾಳು ಹಾಲಪ್ಪ ಇಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಹಾಲಪ್ಪ ಪ್ರಮಾಣ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮರಳು ದಂಧೆಯಲ್ಲಿ ಯಾವುದೇ ಕಮಿಷನ್ ಪಡೆದಿಲ್ಲ ಎಂದು ಪ್ರಮಾಣ ಮಾಡಿದ್ದೇನೆ. ವಿನಾಕಾರಣ ನನ್ನ ವಿರುದ್ಧ ಆರೋಪ ಮಾಡುತ್ತಿರುವ ಬೇಳೂರು ಗೋಪಾಲಕೃಷ್ಣ ಅವರಿಗೆ ದೇವರು ಸದ್ಬುದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು. ಬೇಳೂರು ಗೋಪಾಲಕೃಷ್ಣಗೆ ಬುದ್ಧಿ ಭ್ರಮಣೆಯಾಗಿದೆ. ನನಗೆ ಸವಾಲು ಹಾಕಿ ಅವರು ಪಲಾಯನವಾದ ಮಾಡಿದ್ದಾರೆ. ಧರ್ಮಸ್ಥಳಕ್ಕೆ ಬರದೇ ಗೋವಾ ಚುನಾವಣೆಗೆ ಹೋಗುತ್ತೇನೆ ಎಂದಿದ್ದಾರೆ.

ಇವರಿಗೆ ಗೋವಾ ಚುನಾವಣೆಗೆ ಕರೆದವರು ಯಾರು? ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಹೊರಟಿದ್ದಾರೆ ಎಂದು ಟೀಕಿಸಿದರು. ನಾನು ಯಾವುದೇ ಕಮಿಷನ್ ಹಣ ಪಡೆದಿಲ್ಲ. ನನ್ನ ಕಡೆಯವರು ಕಮಿಷನ್ ಪಡೆದಿಲ್ಲ. ಪ್ರತಿ ಬಾರಿ ನನ್ನ ವಿರುದ್ಧ ಬೇಳೂರು ಗೋಪಾಲಕೃಷ್ಣ ಆರೋಪ ಮಾಡುತ್ತಿದ್ದಾರೆ. ಇದನ್ನು ದೇವರೇ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ವರದಿ ಮಂಜುನಾಥ್ ಶೆಟ್ಟಿ…