ದಿನವಿಡಿ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನೌಕರರ ಮಾನಸಿಕ ಮತ್ತು ದೈಹಿಕ ಸಬಲತೆಗೆ ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ಸಿ ಶಡಕ್ಷರಿ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ ಪಂಚಾಯತ್ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಿನ್ನೆ ಮತ್ತು ಇಂದು ನಗರದ ನೆಹರು ಕ್ರೀಡಾಂಗಣ ಮತ್ತು ನೌಕರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎರಡು ದಿನಗಳ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮೇ ಮಾಹೆಯಲ್ಲಿ ಉದ್ದೇಶಿಸಲಾಗಿದೆ. ಈ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿಗಳು ಹಾಗೂ ಕ್ರೀಡಾ ಸಚಿವರು ಭಾಗವಹಿಸುವರು ಎಂದು ಅವರು ನುಡಿದರು.

ಜಗತ್ತನ್ನೇ ಇನ್ನಿಲ್ಲದಂತೆ ಆತಂಕಕ್ಕೀಡು ಮಾಡಿದ ಕೊರೋನ ಸೋಂಕಿನ ಸಂದರ್ಭದಲ್ಲಿ ನೆರೆಯ ಅನೇಕ ಸರ್ಕಾರಗಳು ನೌಕರರ ವೇತನವನ್ನು ತಡೆಹಿಡಿದವು. ಆದರೆ ಆಡಳಿತಾರೂಢ ರಾಜ್ಯ ಸರ್ಕಾರವು ನೌಕರರಿಗೆ ಯಾವುದೇ ರೀತಿಯ ಅಡಚಣೆ ಉಂಟುಮಾಡದೆ ಪೂರ್ಣಪ್ರಮಾಣದ ವೇತನ ನೀಡಿ ಸಹಕರಿಸಿದೆ ಎಂದ ಅವರು ಈಗಾಗಲೇ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಕೇಂದ್ರಕ್ಕೆ ಸಮಾನವಾದ ವೇತನ ನೀಡುವುದಾಗಿ ಘೋಷಿಸಿದ್ದಾರೆ ಅದಕ್ಕಾಗಿ ಸರ್ಕಾರವನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.

ಮೇ 5ರಂದು ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗಾಗಿ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳಾ ನೌಕರರಿಗೆ ಜಿಲ್ಲಾಡಳಿತ ಒಒಡಿ ಸೌಲಭ್ಯ ಕಲ್ಪಿಸಿದೆ ಎಂದವರು ನುಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಜೆ.ನಾಗರಾಜ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ ಚನ್ನವೀರಪ್ಪ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಸುನೀತಾ ಅಣ್ಣಪ್ಪ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್ ಮೋಹನ್ ಕುಮಾರ್ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೋಶಾಧ್ಯಕ್ಷ ರಘು ಸೇರಿದಂತೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಿನ್ನೆ ಮತ್ತು ಇಂದು ನಡೆದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.

ವರದಿ ಮಂಜುನಾಥ್ ಶೆಟ್ಟಿ…