ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿ “ಸಹಕಾರ ರತ್ನ” ಪ್ರಶಸ್ತಿ ಪಡೆದಿರುವ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಅವರನ್ನು ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಸಹಕಾರ ಕ್ಷೇತ್ರದಲ್ಲಿ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದು, ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಸರ್ವತೋಮುಖ ಅಭಿವೃದ್ಧಿ ಆಗುತ್ತಿದ್ದು, ಬ್ಯಾಂಕ್ ಹಂತ ಹಂತವಾಗಿ ಪ್ರಗತಿ ದಿಸೆಯಲ್ಲಿ ಮುನ್ನಡೆಯುತ್ತಿದೆ. ಬ್ಯಾಂಕ್‌ನ ಸಮಗ್ರ ಅಭಿವೃದ್ಧಿಗೆ ಎಲ್ಲ ಸದಸ್ಯರು ಹಾಗೂ ಸಿಬ್ಬಂದಿಗಳ ಪರಿಶ್ರಮ ಕಾರಣ. ಎಲ್ಲ ಸಹಕಾರ ಸಂಘಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಎಲ್ಲರ ಸಹಕಾರದೊಂದಿಗೆ ಬ್ಯಾಂಕ್‌ನ ಪ್ರಗತಿಗೆ ಸಂಪೂರ್ಣ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ನಮ್ಮ ಸಮಾಜದ ಎಂ.ಬಿ.ಚನ್ನವೀರಪ್ಪ ಅವರು ಸಹಕಾರಿ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆ ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿದೆ. ಸಹಕಾರಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.

ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕಾನೂರ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಎ.ಅಶೋಕ್, ಖಜಾಂಚಿ ರವಿ, ನಿರ್ದೇಶಕರಾದ ಎಂ.ವಿ.ಸಜ್ಜನ್ ಶೆಟ್ಟರ್, ಚನ್ನವಿರೇಶ್ ಕಲ್ಲಿಯಾಳ್, ಬಸವರಾಜು ಈ, ರೇವಪ್ಪ ಗುರುರಾಜ್ ಮಟ್ಟಿ, ಲಿಂಗರಾಜು, ಚನ್ನಬಸವರಾಜು, ಪರಮೇಶ್ವರಪ್ಪ ಇತರರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…