ಶಿವಮೊಗ್ಗ: ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ತಿಳಿಸಿದರು.ಅವರು ಇಂದು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ವಿವರಗಳನ್ನು ನೀಡಿದರು.

ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆ ಅವಧಿಯನ್ನು ಮುಂದಿನ ಜೂನ್‌ವರೆಗೆ ವಿಸ್ತರಿಸಿದೆ. ಆದರೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳು ಬಹುತೇಕ ಈ ವರ್ಷದ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿವೆ. ಒಂದೆರಡು ಕಾಮಗಾರಿಗಳು ಮಾತ್ರ ಮುಂದಿನ ವರ್ಷ ಪೂರ್ಣಗೊಳ್ಳಲಿದೆ. ಸರ್ಕಾರ ಇದುವರೆಗೆ 758 ಕೋಟಿ ರೂ. ಬಿಡುಗಡೆ ಮಾಡಿದ್ದು, 541ಕೋಟಿ ರೂ. ವೆಚ್ಚವಾಗಿದೆ. ಇದುವರೆಗೆ ಯಾವುದೇ ಅನುದಾನ ಲೋಪವಾಗದಂತೆ ಕಾರ್ಯ ನಿರ್ವಹಿಸಲಾಗಿದೆ ಎಂದು ಹೇಳಿದರು.

ದೇಶದಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ 19 ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಒಟ್ಟು 997 ಕೋಟಿ ರೂ. ಅಂದಾಜಿನಲ್ಲಿ 60ಕಾಮಗಾರಿ ಕೈಗೊಳ್ಳಲಾಗಿದ್ದು, 31ಕಾಮಗಾರಿಗಳು ಪೂರ್ಣಗೊಂಡಿವೆ. 29ಕಾಮಗಾರಿಗಳು ಪ್ರಗತಿಯ ವಿವಿಧ ಹಂತದಲ್ಲಿವೆ. ಶೇ.67ರಷ್ಟು ಭೌತಿಕ ಹಾಗೂ ಶೇ.54ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ. 505 ಕೋಟಿ ರೂ. ಅಂದಾಜು ಮೊತ್ತದಲ್ಲಿ 110ಕಿಮೀ ರಸ್ತೆ ಅಭಿವೃದ್ಧಿ, 20ಕೋಟಿ ರೂ. ವೆಚ್ಚದಲ್ಲಿ 113 ಕನ್ಸರ್ವೆನ್ಸಿಗಳ ಅಭಿವೃದ್ಧಿ, 144ಕೋಟಿ ರೂ. ವೆಚ್ಚದಲ್ಲಿ ಹಸಿರೀಕರಣ ಮತ್ತು ಪಾರ್ಕ್ಗಳ ಅಭಿವೃದ್ಧಿ, 57ಕೋಟಿ ರೂ. ವೆಚ್ಚದಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳು, 17ಕೋಟಿ ರೂ. ವೆಚ್ಚದಲ್ಲಿ ನಗರದ ಮೂರು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿ, 89ಕೋಟಿ ರೂ. ವೆಚ್ಚದಲ್ಲಿ ವಾಹನ ಪಾರ್ಕಿಂಗ್, ಹಾಕರ್ಸ್ ಜೋನ್, ಖಾಸಗಿ ಬಸ್ ನಿಲ್ದಾಣ ನವೀಕರಣ ಇತ್ಯಾದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕರ ಅಹವಾಲು ಮತ್ತು ಕುಂದುಕೊರತೆ ನಿವಾರಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ದೂರವಾಣಿ, ಇಮೇಲ್, ವಾಟ್ಸಪ್ ಸೇರಿದಂತೆ ಎಲ್ಲಾ ಮೂಲಗಳಿಂದ ಬರುವ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲಾಗುತ್ತಿದೆ. ಕನ್ಸರ್ವೆನ್ಸಿಗಳನ್ನು ಆದಷ್ಟು ಬೇಗನೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗುವುದು. ಕುವೆಂಪು ರಸ್ತೆ ಕಾಮಗಾರಿಗಳು ಈ ತಿಂಗಳ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿವೆ. ನಗರಾದ್ಯಂತ 16ಸಾವಿರ ಎಲ್‌ಇಡಿ ರಸ್ತೆ ಬದಿ ದೀಪಗಳನ್ನು ಅಳವಡಿಸಲಾಗುತ್ತಿದೆ. 13ಕಡೆಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ವರದಿ ಮಂಜುನಾಥ್ ಶೆಟ್ಟಿ…