ಶಿವಮೊಗ್ಗ: ಡಾ. ಬಿ.ಆರ್. ಅಂಬೇಡ್ಕರ್ ಅವರ 131 ನೇ ಜಯಂತಿ ಅಂಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಇಡಬೇಕೆಂದು ಆಘ್ರಹಿಸಿ ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಅಂಬೇಡ್ಕರ್ ಅವರ 105 ಅಡಿ ಎತ್ತರದ ಪ್ರತಿಮೆಯನ್ನು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಥಾಪಿಸಬೇಕು. ರಾಜ್ಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹೆಸರಿನ ಬದಲಿಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹೆಸರನ್ನು ನಮೂದಿಸಬೇಕು. ಇಲಾಖೆಯ ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಅಂಬೇಡ್ಕರ್ ಹೆಸರು ಇಡಬೇಕು. ಎಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಎಂದು ನಾಂಕರಣ ಮಾಡಬೇಕೆಂದು ಒತ್ತಾಯಿಸಿದರು.ಭೋವಿ ಅಭಿವೃದ್ಧಿ ನಿಗಮಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭೋವಿ ಅಭಿವೃದ್ಧಿ ನಿಗಮ ಎಂದು ನಾಂಕರಣ ಮಾಡುವುದಲ್ಲದೇ, ಇತರ ನಿಗಮಗಳಿಗೂ ಅಂಬೇಡ್ಕರ್ ಹೆಸರನ್ನು ಇಡಬೇಕೆಂದು ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ನಾರಾಯಣ ಐಹೊಳೆ, ಲೋಕೇಶ್, ಪ್ರಭು, ನಾಗರಾಜ್, ಜಯಲಕ್ಷ್ಮಿ, ತಂಗಮ್ಮ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…