ಶಿವಮೊಗ್ಗ: ಮನುಷ್ಯನ ಅತಿಯಾಸೆಯಿಂದ ಮರ ಗಿಡಗಳ ನಾಶ ಅಧಿಕವಾಗಿದ್ದು, ಇದನ್ನು ನಿಯಂತ್ರಿಸಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅದನ್ನು ಉಳಿಸಿ ರಕ್ಷಿಸಿಕೊಳ್ಳಬೇಕು ಎಂದು ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್, ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್, ಶಿವಗಂಗಾ ಯೋಗ ಕೇಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಂದಿನ ಪೀಳಿಗೆಗೆ ನೀರು, ಕಾಡು, ಕಲ್ಮಶ ಇಲ್ಲದ ಭೂಮಿಯನ್ನು ನಾವೆಲ್ಲಾ ಬಿಟ್ಟು ಹೋಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಇತರ ಸಂಘ ಸಂಸ್ಥೆಗಳ ಜತೆ ಕೈಗೂಡಿಸಿ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಸಂಚಾಲಕ, ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ನಿರ್ದೇಶಕ ಕೆ.ಸಿ.ಬಸವರಾಜ್ ಮಾತನಾಡಿ, ನೀರು, ಗಾಳಿ, ಮಲೀನ ಆಗದಂತೆ ತಡೆಯಲು ದೈನಂದಿನ ಕಸದ ವಿಲೇವಾರಿಯನ್ನು ಸರಿಯಾದ ರೀತಿಯಲ್ಲಿ ನಡೆಸಬೇಕು. ಇದಕ್ಕಾಗಿ ಸ್ಥಳೀಯ ಸಂಸ್ಥೆಗಳ ಜತೆ ನಾಗರೀಕ ಸಂಘ ಸಂಸ್ಥೆಗಳು ಕೈಜೋಡಿಸಿ ಶ್ರಮಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಸದ ವಿಲೇವಾರಿ, ತ್ಯಾಜ್ಯದ ನಿರ್ವಹಣೆ ಮತ್ತು ಸಸಿಗಳನ್ನು ನೆಟ್ಟು ಬೆಳೆಸುವ ಬಗ್ಗೆ, ಪರಿಸರ ಸಂರಕ್ಷಣೆ ಬಗ್ಗೆ ಸ್ಥಳೀಯ ನಾಗರೀಕರ/ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಂಸ್ಥೆಗಳ ಜತೆ ನಿರಂತರವಾಗಿ ಕೆಲಸ ಮಾಡಲು ಸಂಸ್ಥೆ ತೊಡಗಿದೆ. ಶಿವಮೊಗ್ಗ ಜಿಲ್ಲೆಯನ್ನು ಸ್ವಚ್ಛ ಹಾಗೂ ಸುಂದರವನ್ನಾಗಿ ಉಳಿಸಿಕೊಳ್ಳಲು ಎಲ್ಲರ ಸಹಕಾರ ಬೇಕು ಎಂದರು.
ಜಿಲ್ಲಾ ಸತ್ರ ನ್ಯಾಯಾಧೀಶ ಮಾನು ಮಾತನಾಡಿ, ಪರಿಸರ ಮಾಲಿನ್ಯ ತಡೆಗಟ್ಟಲು ಎಲ್ಲರ ಸಾಮೂಹಿಕ ಪ್ರಯತ್ನ ಅಗತ್ಯ. ಪರಿಸರ ಸಂರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪರಿಸರ ಅಧಿಕಾರಿ ಹರಿಕುಮಾರ್ ಮಾತನಾಡಿ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಅಂತರ್ ಜಲ ವಿಷವಾಗುವುದನ್ನು ತಪ್ಪಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ನೂರಾರು ಜನರು ಪಾಲ್ಗೊಂಡಿದ್ದು, ತುಂಗಾ ನದಿ ದಡದ ಬೆಕ್ಕಿನಕಲ್ಮಠದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಜಿಲ್ಲಾದ್ಯಂತ ನಡೆಯಲಿರುವ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ನ ಪರಿಸರ ಜಾಗೃತಿ ಹಾಗೂ ಸಸಿಗಳನ್ನು ನೆಟ್ಟು ಬೆಳೆಸುವ ಆಂದೋಲನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳೆಯರು ಪರಿಸರ ಗೀತೆ ಹಾಡಿದರು.ಶಿವಗಂಗಾ ಯೋಗ ಕೇಂದ್ರದ ರುದ್ರಾರಾಧ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಕಣ್ಣನವರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿ ಜಿ.ವಿಜಯಕುಮಾರ್, ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ನ ಮಹದೇವಸ್ವಾಮಿ, ಸುಧಾಕರ್, ಫಾರೂಖ್, ದೇವರಾಜ್, ಬಸವನಗೌಡ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…