ಕೈಗಾರಿಕಾ ಕ್ಷೇತ್ರದಲ್ಲಿ ಜೀವಮಾನ ಸಾಧನೆಗಾಗಿ ಲಘು ಉದ್ಯೋಗ ಭಾರತಿ ಬೆಂಗಳೂರು, ಉತ್ತರ ಕರ್ನಾಟಕ ವತಿಯಿಂದ ನೀಡಲಾಗುವ ಎಂಎಸ್‍ಎಂಇ-2022 ವಿಶೇಷ ಪ್ರಶಸ್ತಿಗೆ ಭಾಜನರಾಗಿರುವ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಇಂದು ಶಿವಗಂಗಾ ಯೋಗ ಕೇಂದ್ರದಿಂದ ಸನ್ಮಾನಿಸಲಾಯಿತು.

ಶಿವಮೊಗ್ಗದ ಕಲ್ಲಳ್ಳಿಯಲ್ಲಿರುವ ಶಿವಗಂಗಾ ಯೋಗ ಕೇಂದ್ರದಲ್ಲಿ ಆಯೋಜಿಸಿದ್ದ ವಿಶೇಷ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ರುದ್ರೇಗೌಡರು ಕೈಗಾರಿಕಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಸಾವಿರಾರು ಕುಟುಂಬಗಳಿಗೆ ಉದ್ಯೋಗ ಅವಕಾಶ ನೀಡುವ ಮೂಲಕ ಜೀವನ ಮುನ್ನಡೆಸಲು ಕಾರಣರಾಗಿದ್ದಾರೆ ಎಂದರು.

ಪ್ರಾಮಾಣಿಕ ವ್ಯಕ್ತಿತ್ವದ ರುದ್ರೇಗೌಡರ ಸಾಧನೆ ಎಲ್ಲರಿಗೂ ಸ್ಫೂರ್ತಿ. ಕೈಗಾರಿಕಾ ಕ್ಷೇತ್ರ ಸೇರಿದಂತೆ ಸಾಮಾಜಿಕ ಸೇವಾ ಕ್ಷೇತ್ರದಲ್ಲಿಯೂ ಅವರು ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಇವರ ಉತ್ತಮ ಸೇವೆಯು ಸಮಾಜದಲ್ಲಿ ನಿರಂತರವಾಗಿ ಮುನ್ನಡೆಯಲಿ ಎಂದು ಆಶಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನಿಮ್ಮೆಲ್ಲರ ಪ್ರೀತಿಗೆ ಚಿರಋಣಿ. ಎಲ್ಲರ ಸಹಕಾರದಿಂದ ಕೈಗಾರಿಕಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದರು.

ಶಿವಗಂಗಾ ಯೋಗ ಕೇಂದ್ರದ ಕಾರ್ಯದರ್ಶಿ ಹಾಗೂ  ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಎನ್.ಎಲ್.ನಾಯಕ್, ಜಗದೀಶ್, ರಾಘವ, ಜಿ.ಎಸ್.ಓಂಕಾರ್, ವಿಜಯಕೃಷ್ಣ, ಜಿ.ವಿಜಯ್‍ಕುಮಾರ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ…