ಶಿವಮೊಗ್ಗ: ದೇಶದ ಭದ್ರತೆಗೆ ಅಪಾಯ, ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುತ್ತಿರುವ “ಅಗ್ನಿಪಥ್ “ಯೋಜನೆ ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳವಳಿ ನಡೆಸಿದ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗ ಅಪಾಯಕಾರಿಯಾಗಬಲ್ಲ ‘ಅಗ್ನಿಪಥ್’ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಬೇಕು. ಈಗಿರುವ ಯಥಾಸ್ಥಿತಿಯಲ್ಲಿಯೇ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ. ಈಗಾಗಲೇ ಕರಾಳ ಕೃಷಿ ಕಾಯ್ದೆಗಳನ್ನು ತರಲು ಹೋಗಿ ದೇಶದ ಅನ್ನದಾತ ರೈತರನ್ನು ಬಲಿಕೊಡಲು ಹೊರಟಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರ, ಈಗ ಸೇನಾ ನೇಮಕಾತಿಯಲ್ಲಿ “ಅಗ್ನಿಪಥ್” ಎಂಬ ಅವೈಜ್ಞಾನಿಕ ಯೋಜನೆಯನ್ನು ಘೋಷಿಸಿ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವದನ್ನು ಖಂಡನೀಯ ಎಂದರು.ನಗರದ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆ ಚಳವಳಿ ನಡೆಸಲಾಗಿದ್ದು, ಸಂದರ್ಭದಲ್ಲಿ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ ಎಂದು ಪ್ರಶ್ನಿಸಿದರು.ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ   ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ ಎಂದು ಪ್ರಜ್ಞಾವಂತ ಯುವಕರು ಈ ಸರ್ಕಾರಕ್ಕೆ ಛೀಮಾರಿ ಹಾಕುತಿದ್ದಾರೆ ಎಂದರು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆ.

ಭ್ರಷ್ಟ ಹಾಗೂ  ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡುತ್ತಿದೆ. ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಸರ್ಕಾರ ಮುಂದಿನ ದಿನಗಳಲ್ಲಿ ಇತರೆ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಟಿರುವುದು ಮುನ್ಸೂಚನೆ ನೀಡುತ್ತದೆ. ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ “ಜೈ ಜವಾನ್ ಜೈ ಕಿಸಾನ್” ಎಂಬ ಘೋಷಣೆಗೆ ಜನವಿರೋಧಿ ಬಿಜೆಪಿ ಸರ್ಕಾರ ” ಅಗ್ನಿಪಥ್” ಎಂಬ ಯೋಜನೆಯ ಮುಖಾಂತರ ಅಗ್ನಿಸ್ಪರ್ಶ ಮಾಡುತ್ತಿರುವುದನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ವಿಧಾನಪರಿಷತ್ ನ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ  ಬಿ. ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್. ಕುಮಾರೇಶ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಈ.ಟಿ. ನಿತಿನ್ ಭದ್ರಾವತಿ ಅಧ್ಯಕ್ಷ ವಿನೋದ್ ಕುಮಾರ್, ಪದಾಧಿಕಾರಿಗಳಾದ ಎಂ. ರಾಹುಲ್, ನದೀಮ್, ಎಂ. ರಾಕೇಶ್, ಇರ್ಫಾನ್, ಸದ್ದಾಮ್, ಚಿನ್ಮಯ್, ಮೋಹನ್ ಸೋಮಿನಕೊಪ್ಪ, ಚೇತನ್, ಮಸ್ತಾನ್, ಸುಹಾಸ್ ಗೌಡ, ಸಲ್ಮಾನ್, ದರ್ಶನ್, ಮಂಜು, ಹರ್ಷ, ರಾಹುಲ್, ಕಾರ್ತಿಕ್, ಗೋವಿಂದ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…