ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 140 ಕ್ಕಿಂತ ಹೆಚ್ಚು ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಏರಲಿದೆ. ಕಾಂಗ್ರೆಸ್ ಪಕ್ಷವು ಧೂಳೀಪಟವಾಗಲಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿದ ಅವರು, 140ಕ್ಕಿಂತ ಹೆಚ್ಚು ಸೀಟು ಗೆಲ್ಲಲು ಪರಿಶ್ರಮ, ಸಂಘಟನೆ ಬಲಪಡಿಸುವುದು ಅಗತ್ಯ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಸಬಲೀಕರಣ, ಮಹಿಳಾ ಸಬಲೀಕರಣ, ಯುವ ಸಬಲೀಕರಣಕ್ಕೆ ಗಮನ ಕೊಟ್ಟರೆ ನಾವು ನಮ್ಮ ಗುರಿ ತಲುಪಬಹುದು ಎಂದು ಕಿವಿಮಾತು ಹೇಳಿದರು.
ಚುನಾವಣೆ ಮತ್ತು ಸಂಘಟನೆ ದೃಷ್ಟಿಯಿಂದ ತಯಾರಿ, ವಾಸ್ತವಿಕ ನಮ್ಮ ಸ್ಥಿತಿ ಏನಿದೆ, ಬೇರೆ ಪಕ್ಷಗಳ ಸ್ಥಿತಿ ಏನಿದೆ ಎಂದು ಅರ್ಥ ಮಾಡಿಕೊಂಡು ಮುಂದುವರಿದರೆ ನಮ್ಮ ಗುರಿ ತಲುಪಲು ಸಾಧ್ಯ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರದ ಕಾರ್ಯಕ್ರಮಗಳು, ಸಾಧನೆಯನ್ನು ಜಗತ್ತೇ ಅಚ್ಚರಿಯಿಂದ ನೋಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಮಾನ್ಯ ಪ್ರಧಾನಿ, ಗೃಹ ಸಚಿವರು, ರಾಷ್ಟ್ರೀಯ ಅಧ್ಯಕ್ಷರು ಹೆಚ್ಚು ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಎಂದರು.

ದಕ್ಷಿಣ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಗೆಲುವು ಸಾಧಿಸಿ ದೇಶಕ್ಕೆ ದೊಡ್ಡ ಸಂದೇಶ ಕೊಡಬೇಕಿದೆ ಎಂದ ಅವರು, ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆದು ಸಂಘಟನೆಯನ್ನು ಗಟ್ಟಿಗೊಳಿಸಬೇಕೆಂದು ತಿಳಿಸಿದರು. ಕೇಂದ್ರ- ರಾಜ್ಯಗಳ ಅನೇಕ ಜನಪರ ಯೋಜನೆಗಳು ನಮಗೆ ಬೆನ್ನೆಲುಬಾಗಿ ನಿಂತಿವೆ ಎಂದು ವಿಶ್ಲೇಷಿಸಿದರು.
ಕೃಷಿ ಯಾಂತ್ರೀಕರಣ ಯೋಜನೆಯಡಿ ಹಲವಾರು ಕೃಷಿ ಯಂತ್ರಗಳನ್ನು ಶೇ 50ರಿಂದ 90ರಷ್ಟು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಲಾಗುತ್ತಿದೆ. ರಾಷ್ಟ್ರೀಯ ಮಿಷನ್ ಯೋಜನೆಯಡಿಯಲ್ಲಿ ರೈತರಿಗೆ ನೆರವು ಲಭಿಸುತ್ತಿದೆ. ಕೃಷಿಕರಿಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತಿದೆ. ಫಸಲ್ ವಿಮಾ ಯೋಜನೆಯಡಿ ಬೆಳೆ ಹಾನಿ ಆದಾಗ ಬೆಳೆ ನಷ್ಟದ ಬಗ್ಗೆ ಶೀಘ್ರವೇ ಮಾಹಿತಿ ಪಡೆಯಲಾಗುತ್ತಿದೆ. ಸಿರಿ ಧಾನ್ಯ ಬೆಳೆಯುವವರ ಸಂಖ್ಯೆ ಹೆಚ್ಚಳಕ್ಕೆ ಪ್ರೋತ್ಸಾಹಧನ ಕೊಡಲಾಗುತ್ತಿದೆ ಎಂದರು.
ಗಂಗಾ ಕಲ್ಯಾಣ ಯೋಜನೆ ಸೇರಿ ವಿವಿಧ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಬೇಕು ಎಂದು ಅವರು ತಿಳಿಸಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ಶ್ರೀನಿರ್ಮಲ್ ಕುಮಾರ್ ಸುರಾಣ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿ ಶ್ರೀಬಸವರಾಜ ಬೊಮ್ಮಾಯಿ ರವರು, ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಶ್ರೀಶ್ರೀಕಾಂತ ಕುಲಕರ್ಣಿ, ಸಹ ಸಂಚಾಲಕ ಶ್ರೀಆರ್.ಕೆ.ಸಿದ್ದರಾಮಣ್ಣ ಅವರು ಭಾಗವಹಿಸಿದ್ದರು.
ಕೋರ್ ಕಮಿಟಿ ಸದಸ್ಯರು, ಕೋರ್ ಕಮಿಟಿ ವಿಶೇಷ ಆಹ್ವಾನಿತರು, ರಾಜ್ಯದ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ರಾಷ್ಟ್ರೀಯ ಮೋರ್ಚಾದ ಪದಾಧಿಕಾರಿಗಳು, ರಾಷ್ಟ್ರೀಯ ಮೋರ್ಚಾಗಳ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ವಕ್ತಾರರು, ರಾಜ್ಯ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಪ್ರಶಿಕ್ಷಣ ಪ್ರಕೋಷ್ಠದ ಸದಸ್ಯರು, ವಿಭಾಗ ಪ್ರಭಾರಿಗಳು, ಸಹ ಪ್ರಭಾರಿಗಳು, ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು, ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು, ಎಲ್ಲ ಜಿಲ್ಲಾ ಅಧ್ಯಕ್ಷರು 3 ದಿನಗಳ ರಾಜ್ಯ ಪ್ರಶಿಕ್ಷಣ ವರ್ಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ವರದಿ ಪ್ರಜಾಶಕ್ತಿ…