ಧಾರವಾಡ ನ್ಯೂಸ್…

ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನಮಂಡಲ ಅಧಿವೇಶನದ ಬಳಿ ಪ್ರತಿಭಟನೆಗಾಗಿ ಆಗಮಿಸುತ್ತಿದ್ದ ನಡೆದ ಅಪಘಾತದಲ್ಲಿ ಗಾಯಗೊಂಡು ಧಾರವಾಡ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಳ್ಳಾರಿ ನಗರದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್‌ ಅವರು ಭೇಟಿ ಮಾಡಿ ಸಾಂತ್ವಾನ ಹೇಳಿದರು.

ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೆಳಗಾವಿ ವಿಧಾನಂಡಲದ ಅಧಿವೇಶನದ ಬಳಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಿದ್ದರು. ಡಿಸೆಂಬರ್‌ 22 ರ ಬೆಳಗಿನ ಜಾವ ಕಾರ್ಯಕರ್ತೆಯರು ತೆರಳುತ್ತಿದ್ದ ಖಾಸಗಿ ವಾಹನಕ್ಕೆ ಧಾರವಾಡ ಜಿಲ್ಲೆಯ ಗರಗ ಪೊಲೀಸ್‌ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ ಹತ್ತಿರ ಬೆಂಗಳೂರು – ಪುಣಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನಕ್ಕೆ ಅಪಘಾತವಾಗಿ 12 ಕಾರ್ಯಕರ್ತೆ/ಸಹಾಯಕಿಯರಿಗೆ ತೀವ್ರ ಗಾಯಗಳಾಗಿವೆ.

ಇದರ ಸುದ್ದಿ ತಿಳಿದ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್‌ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವಾನ ಹೇಳಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇಂದು ಬೆಳಗಿನ ಜಾವ ನಡೆದ ಅಪಘಾತದಲ್ಲಿ 12 ಕಾರ್ಯಕರ್ತೆ/ಸಹಾಯಕಿಯರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನ ಭೇಟಿ ಮಾಡಿ ಸಾಂತ್ವಾನ ಹೇಳಿದ್ದು, ಗಾಯಾಳುಗಳಿಗೆ ಎಲ್ಲಾ ರೀತಿಯ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಧಾರವಾಡ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ವರದಿ ಹರೀಶ್ ಶೆಟ್ಟಿ…