ಶಿವಮೊಗ್ಗ: ಮಲೆನಾಡಿನ ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳುತ್ತಿದ್ದು, ದಶಕಗಳ ಕನಸು ನನಸಾಗಲು ಕಾರಣರಾದ ಎಲ್ಲರಿಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಭಿನಂದನೆ ಸಲ್ಲಿಸಿದೆ.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದ ಕೆಲಸಗಳನ್ನು ವೀಕ್ಷಿಸಿದರು. ಅತ್ಯಂತ ವೇಗಗತಿಯಲ್ಲಿ ಕೆಲಸ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ವಿಮಾಣ ನಿಲ್ದಾಣ ಶೀಘ್ರದಲ್ಲಿ ಆರಂಭ ಆಗುವುದರಿಂದ ಶಿವಮೊಗ್ಗ ಜಿಲ್ಲೆಯ ಉದ್ಯಮ, ಕೈಗಾರಿಕೆ, ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಮೇಲೂ ಧನಾತ್ಮಕ ಪರಿಣಾಮ ಬೀರಲಿದೆ. ವಿವಿಧ ರಾಜ್ಯ, ದೇಶಗಳೊಂದಿಗೆ ವ್ಯವಹಾರ ವೃದ್ಧಿಸಲು ಸಹಕಾರಿ ಆಗಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಳ್ಳುತ್ತಿದ್ದು, ಉದ್ಯಮ ಹಾಗೂ ಕೈಗಾರಿಕಾ ವಲಯದಲ್ಲಿ ಮಹತ್ತರ ಅಭಿವೃದ್ಧಿಗೆ ಕಾರಣವಾಗಲಿದೆ ಎಂಬುದು ಬಹುತೇಕ ವಾಣಿಜ್ಯೋದ್ಯಮಿಗಳ ಅನಿಸಿಕೆಯಾಗಿದೆ. ಪ್ರಯಾಣಿಕರ ಸೌಲಭ್ಯದ ಜತೆಯಲ್ಲಿ ಕಾರ್ಗೋ ಸೇವೆಯನ್ನು ಅರಂಭಿಸುವ ಅವಶ್ಯಕತೆ ಇದೆ. ಅದನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನ ವಹಿಸಿ ಈಡೇರಿಸಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕನಸಿನ ಯೋಜನೆ ಸಾಕಾರಗೊಳ್ಳುತ್ತಿದ್ದು, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಕೊಡುಗೆ ಅಪಾರವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಎಲ್ಲರ ಪರವಾಗಿ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದರು.
ಮಾಜಿ ಅಧ್ಯಕ್ಷ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಡಿ.ಎಂ.ಶಂಕರಪ್ಪ, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಎಸ್.ಎಸ್.ಉದಯ್‌ಕುಮಾರ್, ಪ್ರದೀಪ್ ಎಲಿ, ಮರಿಸ್ವಾಮಿ, ರಮೇಶ್ ಹೆಗಡೆ, ಇಂಜಿನಿಯರ್ ನಿಲೇಶ್ ಹಾಜರಿದ್ದರು.

ವರದಿ ಪ್ರಜಾಶಕ್ತಿ…