ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಮನವಿ ಮಾಡಲಾಯಿತು.

ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನೊಳಗೊಂಡ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದೆನು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಗಳಾದ ಶ್ರೀ ಕೃಷ್ಣ ಪ್ರಸಾದ ಅಡಯಂತಾಯ, ಬೈಂದೂರಿನ ವೆಂಕಟೇಶ್ ಕಿಣಿ ಅವರು ಉಪಸ್ಥಿತರಿದ್ದರು.

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣದ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುತ್ತಾರೆ.

ವರದಿ ಪ್ರಜಾ ಶಕ್ತಿ