14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ, ಕೈಗಾರಿಕೆಗಳಲ್ಲಿ ಹಾಗೂ ಅಪಾಯಕಾರಿಯಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಅಂತಹ ಮಕ್ಕಳನ್ನು ಕೆಲಸದ ಸ್ಥಳದಿಂದ ಮುಕ್ತಿಗೊಳಿಸಿ, ಬಾಲಕಾರ್ಮಿಕ ವಿಶೇಷ ವಸತಿ ಶಾಲೆಯ ಮೂಲಕ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.


ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಮೇಲ್ವಿಚಾರಣೆ ಮತ್ತು ಜಾಗರೂಕತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 18ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧ. ಈ ಸಂಬಂಧ ಜನರಲ್ಲಿ ಜಾಗೃತಿ ಮೂಡಿಸಲು ಜನಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸುವಂತೆ ಅವರು ಸೂಚಿಸಿದರು.


ಬಾಲಕಾರ್ಮಿಕ ಕಾಯ್ದೆಯಡಿ ಕಳೆದ ಒಂದು ವರ್ಷದಿಂದೀಚೆಗೆ ಜಿಲ್ಲೆಯಲ್ಲಿ ಸುಮಾರು 1956 ತಪಾಸಣೆಗಳನ್ನು ನಡೆಸಲಾಗಿದ್ದು, ಲಕ್ಷಾಂತರ ರೂಪಾಯಿಗಳ ದಂಡ ವಸೂಲು ಮಾಡಲಾಗಿದೆ ಅಲ್ಲದೇ ಅನೇಕ ಮೊಕದ್ದಮೆಗಳನ್ನು ದಾಖಲಿಸಿರುವುದಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಅನ್ಯ ರಾಜ್ಯಗಳಿಂದ ಇಲ್ಲಿಗೆ ಬಂದು ಕಟ್ಟಡ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 5ಮಕ್ಕಳನ್ನು ಛತ್ತೀಸ್‌ಘಡ ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ. ಉಳಿದ ಇಲ್ಲಿನ 02ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ ಎಂದ ಅವರು, ಅನ್ಯರಾಜ್ಯಕ್ಕೆ ಕಳುಹಿಸಿಕೊಡಲಾದ ಮಕ್ಕಳು ಶಾಲೆಗೆ ದಾಖಲಾಗಿದ್ದಾರೆಯೇ ಎಂಬ ಬಗ್ಗೆಯೂ ಗಮನಹರಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಪೂರ್ವಾಪರವನ್ನು ತಿಳಿದು, ಅವರ ಶೈಕ್ಷಣಿಕ ಹಂತವನ್ನು ಗಮನಿಸಿ, ಪ್ರಾಥಮಿಕ ಹಂತದ ಶಿಕ್ಷಣ ಕೊಡಿಸಲು ಕೊಡಿಸಲು ಮುಂದಾಗಬೇಕು.

ಅಗತ್ಯವಿದ್ದಲ್ಲಿ ಮಕ್ಕಳಿಗೆ ಕೌಶಲ್ಯಾಧಾರಿತ ತರಬೇತಿ ಕೊಡಿಸುವಂತೆ ಅವರು ಸೂಚಿಸಿದರು.
ದಾಖಲಾಗುವ ಬಾಲಕಾರ್ಮಿಕ ಪ್ರಕರಣಗಳನ್ನು ಗಮನಿಸಿದಾಗ ಮುಸ್ಲಿಂ ಮತ್ತು ಬಂಜಾರ ಸಮುದಾಯದ ಹೆಚ್ಚಿನ ಸಂಖ್ಯೆ ಮಕ್ಕಳು ಗ್ಯಾರೇಜು, ಹೋಟೇಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಲಾಗಿದೆ. ಅದರ ನಿಯಂತ್ರಣ ಕ್ರಮವಾಗಿ ಆಯಾ ಸಮುದಾಯದ ಮುಖಂಡರುಗಳನ್ನು ಕರೆದು ಚರ್ಚಿಸಿ, ಅವರ ಸಹಕಾರದಿಂದ ಬಾಲಕಾರ್ಮಿಕರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.


ಈ ಹಿಂದೆ ಬಾಲ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಪುನರ್ವಸತಿಗೊಳಿಸಲಾಗಿದ್ದ ಉತ್ತರ ಪ್ರದೇಶದ ಮಕ್ಕಳನ್ನು ಅವರ ಹುಟ್ಟೂರಿಗೆ ಕಳುಹಿಸಿಕೊಡಲಾಗಿದ್ದು, ಅವರ ಚಲನವಲನಗಳ ಬಗ್ಗೆಯೂ ಗಮನಹರಿಸುವಂತೆ ಸೂಚಿಸಿದ ಅವರು, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ವಲಯವನ್ನಾಗಿ ನಿರ್ಮಿಸುವ ಕಾರ್ಯಕ್ರಮದ ಭಾಗವಾಗಿ ವಿಶೇಷವಾಗಿ ನಗರ ಮತ್ತು ಪಟ್ಟಣ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಕ್ರಿಯಾ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ಮುಂದಾಗಬೇಕು. ಜನಜಾಗೃತಿ ಸಭೆಗಳನ್ನು ನಡೆಸುವಂತೆ ಸೂಚಿಸಿದರು.


ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಇಲಾಖಾ ವತಿಯಿಂದ ಅನೇಕ ಕಾಯ್ದೆ, ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದರೂ ನಿರೀಕ್ಷಿತ ಪ್ರಗತಿ ಕಾಣದಿರುವುದು ಬೇಸರದ ಸಂಗತಿಯಾಗಿದೆ. ನಿಯಮ ಉಲ್ಲಂಘಿಸಿ, ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ನಿಯಮಾನುಸಾರ ಮೊಕದ್ದಮೆ ದಾಖಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

• ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವವರನ್ನು ಗುರುತಿಸಿ ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವುದರಿಂದ ವಿಚಾರಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಸಾಕಷ್ಟು ಕಾಲಾವಕಾಶ ಬೇಕಾಗಬಹುದು. ಇಂತಹ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಮ್ಮಲ್ಲಿರುವ ಸಾಂದರ್ಭಿಕ ಮಾಹಿತಿಯೊಂದಿಗೆ ನೇರವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶವಿದೆ. ಇದರಿಂದ ತ್ವರಿತಗತಿಯಲ್ಲಿ ಮೊಕದ್ದಮೆ ವಿಚಾರಣೆ ಪೂರ್ಣಗೊಂಡು ತಪ್ಪಿತಸ್ತರಿಗೆ ಶಿಕ್ಷೆ ಆಗಲಿದೆ. ಅಧಿಕಾರಿಗಳು ಈ ಸದವಕಾಶದ ಲಾಭ ಪಡೆಯಿರಿ.


– ಎಂ.ಎಸ್.ಸಂತೋಷ್, ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ.

Leave a Reply

Your email address will not be published. Required fields are marked *