ಮಂಜುನಾಥ್ ಶೆಟ್ಟಿ…

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಬಡಾವಣೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದನ್ನು ಗಮನಿಸಿದ ಶಾಸಕರು, ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಾಸಕರ ಪ್ರಮುಖ ಸೂಚನೆಗಳು…
ಶಾಶ್ವತ ಪರಿಹಾರ: ಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು.
ಹೂಳೆತ್ತುವ ಕಾರ್ಯ: ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು.
ತ್ವರಿತ ಸ್ಪಂದನೆ: ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು.
ಬಳಿಕ ಮಾತನಾಡಿದ ಶಾಸಕರು, “ಜನಸಾಮಾನ್ಯರು ಮಳೆಯಿಂದಾಗಿ ಸಂಕಷ್ಟಕ್ಕೀಡಾಗುತ್ತಿರುವುದು ವಿಷಾದನೀಯ. ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ,” ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರದ ಮಾಯಣ್ಣ ಗೌಡ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.