ಮಂಜುನಾಥ ಶೆಟ್ಟಿ…
ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸೋಮವಾರ ನ್ಯಾಯಾಲಯ ಆವರಣದಲ್ಲಿ ಭದ್ರತಾ ಸಿಬ್ಬಂದಿ, ಶ್ವಾನದಳ ಹಾಗೂ ಎಎಸ್ಸಿ (Anti Sabotage Check) ತಂಡಗಳಿಂದ ವ್ಯಾಪಕ ತಪಾಸಣೆ ನಡೆಸಲಾಯಿತು. ಬೆದರಿಕೆ ಸಂದೇಶದಿಂದ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ (PDJ) ಕಚೇರಿಯ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬಂದಿದೆ. ನಿರ್ದಿಷ್ಟ ಸಮಯದಲ್ಲಿ ನ್ಯಾಯಾಲಯ ಆವರಣದಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಇ-ಮೇಲ್ನಲ್ಲಿ ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ.
ಇ-ಮೇಲ್ ಬಂದ ತಕ್ಷಣ ನ್ಯಾಯಾಲಯದ ಅಧಿಕಾರಿಗಳು ವಿಷಯವನ್ನು ಜಿಲ್ಲಾ ಪೊಲೀಸ್ ಇಲಾಖೆಯ ಗಮನಕ್ಕೆ ತಂದರು. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದರು. ನಂತರ ಶ್ವಾನದಳ ಮತ್ತು ಎಎಸ್ಸಿ ತಂಡಗಳನ್ನು ಕರೆಸಿ ನ್ಯಾಯಾಲಯದ ಕಟ್ಟಡ, ನ್ಯಾಯಾಂಗ ಕೊಠಡಿಗಳು, ವಾಹನ ನಿಲುಗಡೆ ಪ್ರದೇಶ ಹಾಗೂ ಸಾರ್ವಜನಿಕರು ಸಂಚರಿಸುವ ಸ್ಥಳಗಳಲ್ಲಿ ಸಮಗ್ರ ತಪಾಸಣೆ ನಡೆಸಲಾಯಿತು.
ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಆದಾಗ್ಯೂ, ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯ ಆವರಣದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಿಗೆ ಇದೇ ಮಾದರಿಯ ಬೆದರಿಕೆ ಸಂದೇಶಗಳು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಧಾರವಾಡದಲ್ಲಿರುವ ಹಾಗೂ ಸುಮಾರು ಎರಡು ತಿಂಗಳ ಹಿಂದೆ ಶಿವಮೊಗ್ಗದ ಸಿವಿಲ್ ನ್ಯಾಯಾಲಯಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಆ ಪ್ರಕರಣಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿತ್ತು.
ಇದೀಗ ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಬಂದಿರುವ ಬೆದರಿಕೆ ಇ-ಮೇಲ್ ಸಂಬಂಧವೂ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ನ್ಯಾಯಾಲಯವು ವ್ಯಾಪ್ತಿಗೆ ಒಳಪಡುವುದರಿಂದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ಇ-ಮೇಲ್ ಮೂಲವನ್ನು ಪತ್ತೆಹಚ್ಚುವ ಕಾರ್ಯ ಆರಂಭವಾಗುವ ಸಾಧ್ಯತೆ ಇದೆ.
ಬಾಂಬ್ ಬೆದರಿಕೆ ನಿಜವೇ ಅಥವಾ ಕಿಡಿಗೇಡಿಗಳ ಕೃತ್ಯವೇ ಎಂಬುದು ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದ್ದು, ಪೊಲೀಸರು ತಾಂತ್ರಿಕ ಮಾಹಿತಿಗಳನ್ನು ಸಂಗ್ರಹಿಸಿ ಇ-ಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ನಡುವೆ ನ್ಯಾಯಾಲಯದ ಕಾರ್ಯಚಟುವಟಿಕೆಗಳು ಭದ್ರತಾ ಕ್ರಮಗಳ ನಡುವೆಯೇ ಮುಂದುವರಿದವು.