ಮಂಜುನಾಥ ಶೆಟ್ಟಿ…
ತವರು ಜಿಲ್ಲೆಯ ಶಾಸಕರು ಮತ್ತು ಕಾನೂನು ಪ್ರತಿನಿಧಿಗಳ ನಿಯೋಗದೊಂದಿಗೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕೋರಿಕೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾವಿರಾರು ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರಿರುವ ಬೆಳೆ ವಿಮಾ ಪರಿಹಾರ ವೈಪರೀತ್ಯಗಳನ್ನು ಪರಿಹರಿಸಿ, ಸರಿಪಡಿಸಲು ಸಂಸದರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ, ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಬೇಡಿಕೆಗೆ ವ್ಯಕ್ತವಾಗುತ್ತಿರುವ ಜನಾಗ್ರಹವನ್ನು ಮುಖ್ಯಮಂತ್ರಿಗಳಿಗೆ ತಿಳಿಸಿತು. ಬಿ.ವೈ.ರಾಘವೇಂದ್ರ ಅವರ ನೇತೃತ್ವದ ನಿಯೋಗದಲ್ಲಿ, ಶಿವಮೊಗ್ಗ ಶಾಸಕ ಚನ್ನಬಸಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಮತ್ತು ಅರುಣ್ ಡಿ.ಎಸ್., ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ಸಾಗರ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಗಿರೀಶ್ ಗೌಡ; ಶಿಕಾರಿಪುರ ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಉಮೇಶ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಹಿರಿಯ ವಕೀಲರು ಮತ್ತು ವಕೀಲರ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯ ಬೇಡಿಕೆ, ಜಿಲ್ಲೆಯ ಸಮಾಗ್ರ ಕಾನೂನು ವಲಯ ಹಾಗೂ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಸಾರ್ವಜನಿಕರ ದೀರ್ಘಕಾಲೀನ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಒತ್ತಿ ತಿಳಿಸಿದೆ.
ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ ಆಗಬೇಕು…
ಮಲೆನಾಡು ಮತ್ತು ಮಧ್ಯ ಕರ್ನಾಟಕದಾದ್ಯಂತ ಕಾನೂನು ಸಮುದಾಯ, ವಕೀಲರ ಸಂಘಗಳು, ನಾಗರಿಕ ಸಂಸ್ಥೆಗಳು ಮತ್ತು ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗಳನ್ನು ಮತ್ತು ಅದಕ್ಕೆ ಸಕಾರಣಗಳೊಂದಿಗೆ ಮುಖ್ಯಮಂತ್ರಿಗಳಿಗೆ ವಿವರವಾದ ಪತ್ರದೊಂದಿಗೆ ಮುಖ್ಯಮಂತ್ರಿಗಳಿಗೆ ವಿವರಿಸಿದ ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಲು ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಸಂವಿಧಾನದ ಸದಾಶಯದಂತೆ ಇದು ನ್ಯಾಯವನ್ನು ಜನರಿಗೆ ಹತ್ತಿರ ತರುವ ಜೊತೆಗೆ ಪ್ರದೇಶದಲ್ಲಿ ನ್ಯಾಯಾಂಗ ಸೇವೆಗಳ ಲಭ್ಯತೆಯನ್ನು ಗಮನಾರ್ಹವಾಗಿ ಸುಧಾರಿಸುತ್ತದೆ ಎಂದು ತಿಳಿಸಿದರು.
ಶಿವಮೊಗ್ಗದ ಭೌಗೋಳಿಕ ಅನುಕೂಲಗಳು, ಉತ್ತಮ ಸಂಪರ್ಕ ವ್ಯವಸ್ಥೆ ಹಾಗೂ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಶೈಕ್ಷಣಿಕ, ವಾಣಿಜ್ಯ ಮತ್ತು ಸಾಂಸ್ಥಿಕ ಕೇಂದ್ರವಾಗಿ ಬೆಳೆಯುತ್ತಿರುವ ಪ್ರಾಮುಖ್ಯತೆಯನ್ನು ವಿವರಿಸಿರುವ ಸಂಸದರು, ಜಿಲ್ಲೆಗೆ ಮಾತ್ರವಲ್ಲ, ಮಧ್ಯಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಸೂಕ್ತವಾದ ಸ್ಥಳವಾಗಿದೆ ಎಂದು ಸಂಸದರು ಹೇಳಿದರು.
ಇದರಿಂದ ಶಿವಮೊಗ್ಗ ಜಿಲ್ಲೆಯ ಜನರಿಗೆ ಮಾತ್ರವಲ್ಲದೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಸೇರಿದಂತೆ ನೆರೆಯ ಜಿಲ್ಲೆಗಳ ಸಾರ್ವಜನಿಕರಿಗೆ ಮತ್ತು ದಾವೆದಾರರಿಗೂ ನ್ಯಾಯಿಕ ಸೇವೆ ಪಡೆಯಲು ಅನುಕೂಲವಾಗುತ್ತದೆ, ಪ್ರಯಾಣದ ಸಮಯ, ವೆಚ್ಚ ಮತ್ತು ಇನ್ನಿತರ ಅಡಚಣೆಗಳನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ. ನಿನ್ನೆ ತಾನೇ ಘನತೆವೆತ್ತ ರಾಜ್ಯಪಾಲರನ್ನು ಭೇಟಿ ಮಾಡಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಒತ್ತಾಯಿಸಿದ್ದ ಸಂಸದ ರಾಘವೇಂದ್ರ, ಇಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಆಗ್ರಹಿಸಿರುವುದು, ಸರ್ಕ್ಯೂಟ್ ಪೀಠ ಸ್ಥಾಪನೆ ನಿಟ್ಟಿನಲ್ಲಿ ಸಂಸದರ ಗಂಭೀರ ಹಾಗೂ ಪ್ರಾಮಾಣಿಕ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ.
ಪ್ರಮುಖವಾಗಿ, ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆ ಆಗುವವರೆಗೆ, ಶಿವಮೊಗ್ಗ ಜಿಲ್ಲೆಯನ್ನು ಬೆಂಗಳೂರಿನ ಹೈಕೋರ್ಟ್ನ ಪ್ರಧಾನ ಪೀಠದ ವ್ಯಾಪ್ತಿಯಲ್ಲಿ ಮುಂದುವರಿಯುವಂತೆ ನೋಡಿಕೊಳ್ಳಬೇಕೆಂದು ಸಂಸದರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಪಶ್ಚಿಮ ಘಟ್ಟಗಳ ಕಠಿಣ ಭೂಪ್ರದೇಶ ಮತ್ತು ಮಳೆಗಾಲದಲ್ಲಿ ಪದೇ ಪದೇ ಸಂಭವಿಸುವ ನೈಸರ್ಗಿಕ ಅಡಚಣೆಗಳಿಂದಾಗಿ ಶಿವಮೊಗ್ಗವನ್ನು ಪ್ರಸ್ತಾವಿತ ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರಿಸುವುದು ಬೇಡ, ಹಾಗೆ ಮಾಡುವುದರಿಂದ ದಾವೆದಾರರು, ವಕೀಲರು ಮತ್ತು ಸಾರ್ವಜನಿಕರ ಮೇಲೆ ಅನಗತ್ಯವಾಗಿ ಹೆಚ್ಚಿನ ಹೊರೆ ಹೊರೆಸಿದಂತಾಗುತ್ತದೆ ಎಂದು ಅವರು ಗಮನಸೆಳೆದರು. ಇದರಿಂದಾಗಿ ನ್ಯಾಯ ಪ್ರಾಪ್ತಿಯಲ್ಲಿ ವಿಳಂಬ ಮತ್ತು ಅಧಿಕ ವೆಚ್ಚದ ಹೊರೆಯಿಂದ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಸಂಸದರು ತಿಳಿಸಿದ್ದಾರೆ.
ಬೆಳೆ ವಿಮಾ ಪರಿಹಾರದ ವೈಪರೀತ್ಯಗಳನ್ನು ಸರಿಪಡಿಸುವಂತೆ ಸಂಸದರ ಒತ್ತಾಯ…
ಮುಖ್ಯಮಂತ್ರಿಗಳ ಭೆಟೊ ಸಂದರ್ಭದಲ್ಲಿ ಸಂಸದ ರಾಘವೇಂದ್ರ ಅವರು, 2024-25ನೇ ಸಾಲಿನ ಪುನರ್ ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (R-WBCIS) ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ರೈತರಿಗೆ ನೀಡಲಾದ ಪರಿಹಾರದಲ್ಲಿನ ಗಂಭೀರ ವ್ಯತ್ಯಾಸಗಳ ವಿಷಯವನ್ನು ಪ್ರಸ್ತಾಪಿಸಿದರು.
ಅವೈಜ್ಞಾನಿಕ ಮೇಲ್ವಿಚಾರಣೆ ಮತ್ತು ಟೆಲಿಮೆಟ್ರಿಕ್ ಮಳೆ ಮಾಪಕಗಳು (TRGs) ಮತ್ತು ಟೆಲಿಮೆಟ್ರಿಕ್ ಹವಾಮಾನ ಕೇಂದ್ರಗಳ (TWSs) ಅಸಮರ್ಪಕ ನಿರ್ವಹಣೆಯಿಂದಾಗಿ ಪರಿಹಾರದ ಮೊತ್ತದಲ್ಲಿ ಗಮನಾರ್ಹ ವ್ಯತ್ಯಾಸಗಳು ಉಂಟಾಗಿವೆ, ಒಂದೇ ರೀತಿಯ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಿದ ನೆರೆಯ ಹಳ್ಳಿಗಳ ರೈತರು ಪಡೆದ ಬೆಳೆ ನಷ್ಟಗಳ ವಿಭಿನ್ನ ಪಾವತಿಗಳ ಕುರಿತು ಮುಖ್ಯಮಂತ್ರಿಗಳಿಗೆ ಸಂಸದ ರಾಘವೇಂದ್ರ ತಿಳಿಸಿಕೊಟ್ಟರು.
ಈ ಅಸಮಾನತೆಗಳು ಶಿವಮೊಗ್ಗ ಜಿಲ್ಲೆಯ ರೈತರಲ್ಲಿ ಉಂಟು ಮಾಡಿರುವ ವ್ಯಾಪಕ ಅಸಮಾಧಾನವನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿರುವ ಸಂಸದರು, ಪರಿಹಾರದಲ್ಲಿ ಆಗಿರುವ ವೈಪರೀತ್ಯಗಳನ್ನು ಸರಿಪಡಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸಲ್ಲಿಸಲಾಗಿದ್ದ ವಿವರವಾದ ಪ್ರಸ್ತಾವನೆಯು ಹಲವಾರು ತಿಂಗಳುಗಳಿಂದ ರಾಜ್ಯ ಸರ್ಕಾರದೊಂದಿಗೆ ಬಾಕಿ ಇದೆ ಎಂದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಕೋರಿರುವ ಸಂಸದ ರಾಘವೇಂದ್ರ, ಸರ್ಕಾರಕ್ಕೆ ಸಲ್ಲಿಸಲಾಗಿರುವ ಪ್ರಸ್ತಾವನೆಯ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳಬೇಕು, ಪರಿಹಾರ ಮೌಲ್ಯಮಾಪನದ ಮೇಲೆ ಪರಿಣಾಮ ಬೀರುವ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಮತ್ತು ಬಾಧಿತ ರೈತರು ಮತ್ತಷ್ಟು ವಿಳಂಬವಿಲ್ಲದೆ ನ್ಯಾಯಯುತ ಪರಿಹಾರ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.