ಮಂಜುನಾಥ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ NEET ಪರೀಕ್ಷೆಯ ಬದಲಿಗೆ ರಾಜ್ಯ ಮಟ್ಟದ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಯದಂತೆ ಮಾಡಿ, ಪ್ರಶ್ನೆಪತ್ರಿಕೆಯ ಸೋರಿಕೆಯನ್ನು ತಡೆಯಲಾಗದೇ ಮರುಪರೀಕ್ಷೆ ನಡೆಸಿ, ಸುಮಾರು 17 ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ದರ್ಮೇಂದ್ರ ಪ್ರಧಾನ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಹಿಂದಿನಂತೆ ಸಿಇಟಿ ಪರೀಕ್ಷೆಯನ್ನೇ ಮುಂದುವರೆಸಬೇಕು ಎಂದು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಈ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳನ್ನು ಒತ್ತಾಯಿಸುತ್ತಿದೆ.
ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯದ ಕನಸು ಹೊತ್ತುಕೊಂಡು ನೀಟ್ ಪರೀಕ್ಷೆಯನ್ನು ಬರೆಯುತ್ತಾರೆ. ಆದರೆ, ಈ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.
ಅಲ್ಲದೇ ಮರು ಪರೀಕ್ಷೆಯನ್ನು ನಡೆಸುವ ಮೂಲಕ ಅಮಾಯಕ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಿದೆ. ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿ ದೇಶಾದ್ಯಂತ ಸುಮಾರು 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಈ ಹಿನ್ನೆಲೆ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕುಂದಿದೆ.
ಪ್ರಧಾನಿ ನರೇಂದ್ರ ಮೋದಿಯವರು ಘೋರ ದುರಂತ ನಡೆದಿದ್ದರೂ ಆ ಬಗ್ಗೆ ಇದುವರೆಗೂ ಚಕಾರವೆತ್ತಲಿಲ್ಲ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಗೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಮೂಲಕ ಸೂತಕದ ವಾತಾವರಣದಲ್ಲೂ ಸಂಭ್ರಮಿಸಿದ್ದಾರೆ.
ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲಾಗದೇ ಮರುಪರೀಕ್ಷೆ ನೆಡೆಸಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು.
ದೇಶದಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯಗಳಿಗೆ ತಮ್ಮದೇ ಸಿಇಟಿ ಮೂಲಕ ವೈದ್ಯಕೀಯ ಪ್ರವೇಶಾತಿ ನಡೆಸುವ ಅವಕಾಶ ಮಾಡಿಕೊಡಬೇಕು. ಪರೀಕ್ಷಾ ಅಕ್ರಮಗಳ ಬಗ್ಗೆ ಸಂಪೂರ್ಣ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು.
ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ಸಚಿವ ಸ್ಥಾನದಿಂದ ವಜಾಗೊಳಿಸದೇ ಇದ್ದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಈ ಮೂಲಕ ತಿಳಿಸುತ್ತಿದ್ದೇವೆ.
ಈ ಸಂದರ್ಭದಲ್ಲಿ ಯುವ ಮುಖಂಡ ಮಧುಸೂದನ್, ಜಿಲ್ಲಾ ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್ ಶೆಟ್ಟಿ , ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷ ಗಿರೀಶ್, ಮಹಮದ್ ಗೌಸ್, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್, ಮಲಗೊಪ್ಪ ಶಿವು, ರೇಷ್ಮಾ,ಗೌತಮ್, ಬಾಬು, ತೌಫಿಕ್, ನಿಖಿಲ್, ವಿಷ್ಣು, ಆಕಾಶ್, ಅಶೋಕ್, ಲಿಂಗರಾಜು, ರವಿ, ಯೋಗೇಶ್,ಅರುಣ್, ಪ್ರಶಾಂತ್, ಗೌತಮ್, ದೃಶ್ಯ, ರೋಷನ್, ಅನೂಪ್, ಮನು, ಗಣೇಶ್, ಗಗನ್ ಹಾಗೂ ನೂರಾರು ಯುವಕ ಮುಖಂಡರು ಪಾಲ್ಗೊಂಡಿದ್ದರು.