ಮಂಜುನಾಥ ಶೆಟ್ಟಿ…
ಕೊಡಚಾದ್ರಿ ಬೆಟ್ಟದಲ್ಲಿ ಚಲನಚಿತ್ರ ನಿರ್ಮಾಪಕ ಬಾಮ ಹರೀಶ್ ಪುತ್ರ ಉಲ್ಲಾಸ್ ಗೌಡ 28 ರವರು ಸ್ನೇಹಿತರೊಂದಿಗೆ ಕೊಡಚಾದ್ರಿ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಉಲ್ಲಾಸ್ ಗೌಡ ಅವರು ಬೆಂಗಳೂರಿನಿಂದ 13 ಮಂದಿ ಸ್ನೇಹಿತರ ತಂಡದೊಂದಿಗೆ ಟಿ.ಟಿ ವಾಹನದಲ್ಲಿ ಕೊಡಚಾದ್ರಿಗೆ ಆಗಮಿಸಿದ್ದರು. ಶನಿವಾರ ಬೆಳಗ್ಗೆ ಎಲ್ಲರೂ ಒಟ್ಟಾಗಿ ಕೊಡಚಾದ್ರಿ ಬೆಟ್ಟದ ಪ್ರಮುಖ ಆಕರ್ಷಣೆಯಾದ ಸರ್ವಜ್ಞ ಪೀಠದವರೆಗೆ ಟ್ರೆಕ್ಕಿಂಗ್ ಮಾಡಿದರು. ಪ್ರಕೃತಿ ಸೌಂದರ್ಯವನ್ನು ಸವಿದು ಸಂಜೆ ವಾಪಸ್ ಕೆಳಗಿಳಿಯುತ್ತಿದ್ದರು.
ಬೆಟ್ಟದ ಮೇಲಿರುವ ದೇವಸ್ಥಾನದ ಬಳಿ ಇಳಿಯುತ್ತಿದ್ದ ವೇಳೆ ಉಲ್ಲಾಸ್ ಅವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಇದನ್ನು ಕಂಡು ಆತಂಕಗೊಂಡ ಸ್ನೇಹಿತರು ಕೂಡಲೇ ಸ್ಥಳೀಯರ ನೆರವಿನಿಂದ ಅವರನ್ನು ಬೆಟ್ಟದಿಂದ ಕೆಳಕ್ಕೆ ತಂದರು. ಬಳಿಕ ಹತ್ತಿರದ ನಗರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು.
ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಉಲ್ಲಾಸ್ ಅವರನ್ನು ತುರ್ತಾಗಿ ಹೊಸನಗರ ತಾಲೂಕು ನಗರ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.ವೈದ್ಯರು ಪರೀಕ್ಷಿಸಿ ಅವರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಟ್ರೆಕ್ಕಿಂಗ್ ತಂಡದ ಸ್ನೇಹಿತರು ಮತ್ತು ಸ್ಥಳೀಯರು ಆಘಾತಕ್ಕೆ ಒಳಗಾಗಿದ್ದಾರೆ. ಉಲ್ಲಾಸ್ ಗೌಡ ಅವರು ಕ್ರೀಡೆ ಮತ್ತು ಸಾಹಸ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿದ್ದರು. ಕೆಲವು ತಿಂಗಳ ಹಿಂದಷ್ಟೇ ಅವರ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಮುಂಬರುವ ಡಿಸೆಂಬರ್ನಲ್ಲಿ ಅವರ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ.
ಉಲ್ಲಾಸ್ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಸಂತಾಪ ವ್ಯಕ್ತಪಡಿಸಿದ್ದಾರೆ.