ಮಂಜುನಾಥ ಶೆಟ್ಟಿ…

ಶಿವಮೊಗ್ಗ ನಾಗರಿಕ ಹಿತರಕ್ಷಣ ವೇದಿಕೆಗಳ ಒಕ್ಕೂಟದ ವತಿಯಿಂದ ಶಾಸಕರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಸದಸ್ಯರು ಹೆಚ್ಚಿನ ಸಾಮರ್ಥ್ಯದ ಶುದ್ಧೀಕರಣ ಘಟಕ ನಿರ್ಮಾಣ, ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಭೂಗತ ವಿದ್ಯುತ್ ಕೇಬಲ್ ಕಾಮಗಾರಿ ಪೂರ್ಣಗೊಂಡಿದ್ದರೂ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸದಿರುವುದು, ಬಳಕೆಗೆ ಯೋಗ್ಯವಲ್ಲದ ಇ-ಟಾಯ್ಲೆಟ್‌ಗಳು, ಖಾತೆ ಬದಲಾವಣೆ ಶುಲ್ಕದ ಹೆಸರಿನಲ್ಲಿ ಅತಿಯಾದ ಶುಲ್ಕ ವಸೂಲಿ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು ₹300ರಿಂದ ₹400 ಕೋಟಿ ವೆಚ್ಚದಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಕೈಗೊಳ್ಳಲಾಗಿದೆ. ಭೂಗತ ಕೇಬಲ್ ಅಳವಡಿಸಿದ ನಂತರ ರಸ್ತೆಗಳಲ್ಲಿರುವ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಂಡು ಸುಮಾರು ಐದು ವರ್ಷ ಕಳೆದರೂ ಕಂಬಗಳನ್ನು ತೆರವುಗೊಳಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಒಕ್ಕೂಟದ ಮುಖ್ಯಸ್ಥರು ಆರೋಪಿಸಿದರು.

ಕುರಿತು ಹಲವು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಮನವಿ ಮಾಡಿದ್ದರೂ ಸ್ಪಂದನೆ ದೊರೆಯುತ್ತಿಲ್ಲ. ಜನರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ನೋವುಂಟು ಮಾಡುತ್ತಿದೆ ಎಂದು ಅವರು ಹೇಳಿದರು.

ಕೋಟ್ಯಂತರ ವೆಚ್ಚದ ಇ-ಟಾಯ್ಲೆಟ್‌ಗಳು ಬಳಕೆಗೆ ಬಾರದಂತಾಗಿವೆ…


ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಇ-ಟಾಯ್ಲೆಟ್‌ಗಳು ಸಾರ್ವಜನಿಕರ ಬಳಕೆಗೆ ಯೋಗ್ಯವಾಗಿಲ್ಲ. ನಗರಕ್ಕೆ ಮೂಲಭೂತ ಸೌಕರ್ಯಗಳ ಅಗತ್ಯವಿರುವ ಸಂದರ್ಭದಲ್ಲಿ ಸಾರ್ವಜನಿಕರ ಬಳಕೆಗೆ ಬರಬೇಕಿದ್ದ ಇ-ಟಾಯ್ಲೆಟ್‌ಗಳು ನಿರುಪಯುಕ್ತವಾಗಿರುವುದು ಅಧಿಕಾರಿಗಳ ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ ಎಂದರು.

ಇವುಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಅವರು ಆಗ್ರಹಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಲೋಪದೋಷ ಆರೋಪ…


ನಗರದ ವಿವಿಧ ಭಾಗಗಳಲ್ಲಿ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಹಲವು ಲೋಪದೋಷಗಳಿವೆ ಎಂದು ಒಕ್ಕೂಟ ಆರೋಪಿಸಿದೆ. ಕಾಮಗಾರಿಗಳಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ, ಸ್ಥಳಗಳ ಛಾಯಾಚಿತ್ರಗಳ ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದೆ. ಆದರೆ ಇದುವರೆಗೆ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿ, ಕಂಡುಬರುವ ಲೋಪದೋಷಗಳನ್ನು ಸರಿಪಡಿಸುವುದರ ಜೊತೆಗೆ ಕಾಮಗಾರಿಗಳ ನಿರ್ವಹಣೆಯ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ಖಾತೆ ಬದಲಾವಣೆ ಶುಲ್ಕದ ಬಗ್ಗೆ ಆಕ್ರೋಶ
ಶಿವಮೊಗ್ಗ ನಗರದಲ್ಲಿ ಖಾತೆ ಬದಲಾವಣೆ ಶುಲ್ಕದ ಹೆಸರಿನಲ್ಲಿ ಸರ್ಕಾರದ ಸುತ್ತೋಲೆಯಲ್ಲಿ ನಿಗದಿಪಡಿಸಿರುವ ಮೊತ್ತಕ್ಕಿಂತ ಹಲವು ಪಟ್ಟು ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಸರ್ಕಾರದ ನಿಯಮಾವಳಿಗೆ ವಿರುದ್ಧವಾಗಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದರೆ ಅದನ್ನು ತಕ್ಷಣ ಸರಿಪಡಿಸಬೇಕು. ಈ ಸಮಸ್ಯೆಯನ್ನು ಬಗೆಹರಿಸಲು ಆರು ತಿಂಗಳು ಬೇಕಾಗುವ ಪರಿಸ್ಥಿತಿ ಏಕೆ ನಿರ್ಮಾಣವಾಗಿದೆ ಎಂದು ಪ್ರಶ್ನಿಸಿದರು.

10 ತಿಂಗಳಿಂದ ಮನವಿ, ಸಭೆಗೆ ಆಗ್ರಹ
ಸಮಸ್ಯೆಗಳ ಪರಿಹಾರಕ್ಕಾಗಿ ಕಳೆದ ಸುಮಾರು 10 ತಿಂಗಳಿಂದ ಶಾಸಕರು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುತ್ತಿದ್ದರೂ ಸಮಸ್ಯೆಗಳ ಕುರಿತು ಸಮರ್ಪಕ ಸಭೆ ನಡೆಯುತ್ತಿಲ್ಲ ಎಂದು ವಸಂತ್ ಕುಮಾರ್ ಆರೋಪಿಸಿದರು.

ನಾವು ಒಳ್ಳೆಯ ಮಾತಿನಲ್ಲಿ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಸ್ಪಂದನೆ ದೊರೆಯುತ್ತಿಲ್ಲ. ಶಾಸಕರ ಮೇಲೆ ನಮಗೆ ಭರವಸೆ ಇದೆ. ಅವರು ನಮ್ಮ ಮನವಿಯನ್ನು ಸ್ವೀಕರಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು” ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಸಂತ್ ಕುಮಾರ್ ಡಾ ಸತೀಶ್ ಕುಮಾರ್ ಶೆಟ್ಟಿ ಮುಖಂಡರು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *