ಮಂಜುನಾಥ್ ಶೆಟ್ಟಿ…
ದಿನಾಂಕ 01-10-2026 ರ ವೇಳೆಗೆ 18 ವರ್ಷ ವಯಸ್ಸು ಪೂರೈಸುವ ಎಲ್ಲಾ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಹೆಸರು ಸೇರ್ಪಡೆಗೊಳಿಸಲು ಸುವರ್ಣಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸುಜಾತ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮತದಾರರ ಸಾಕ್ಷರತಾ ಸಂಘಗಳ ಸಂಚಾಲಕರ ಸಭೆಯಲ್ಲಿ ಅವರು ಮಾತನಾಡಿದರು.
ತಮ್ಮ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನಿಗದಿತ ಅರ್ಹತಾ ದಿನಾಂಕದ ವೇಳೆಗೆ 18 ವರ್ಷ ಭರ್ತಿಯಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಮತದಾರರ ಪಟ್ಟಿಗೆ ನೊಂದಾಯಿಸಲು ಸಂಬಂಧಪಟ್ಟ ಸಂಸ್ಥೆಗಳ ಮುಖ್ಯಸ್ಥರು ಅಗತ್ಯ ಕ್ರಮ ವಹಿಸಬೇಕು ಎಂದು ಈ ಸಂದರ್ಭದಲ್ಲಿ ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ ಹೊಸದಾಗಿ ಮತದಾರರ ಹೆಸರು ನೊಂದಣಿಗಾಗಿ ‘ಫಾರ್ಮ್-6’ ಅನ್ನು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಸರಳವಾಗಿ ಭರ್ತಿ ಮಾಡುವ ವಿಧಾನಗಳ ಬಗ್ಗೆ ವಿವರವಾದ ಮಾಹಿತಿ ನೀಡಲಾಯಿತು.
ಈ ಸಭೆಯಲ್ಲಿ ರಾಜ್ಯಮಟ್ಟದ ಸ್ವೀಪ್ ತರಬೇತಿದಾರರಾದ ನವೀದ್ ಅಹಮದ್ ಪರ್ವೀಜ್, ಡಾ. ಕಿರಣ್ ಸೇರಿದಂತೆ ಅಧಿಕಾರಿಗಳು ಹಾಗೂ ವಿವಿಧ ಕಾಲೇಜುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.