ಮಂಜುನಾಥ್ ಶೆಟ್ಟಿ…
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಮ್ಮಿಕೊಂಡಿರುವ ಒಂದು ತಿಂಗಳ ಸೇವಾ ಸಂಕಲ್ಪ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು.
ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಸದ ಬಿ ವೈ ರಾಘವೇಂದ್ರ ಅವರು ಅಭಿಯಾನದ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ನರೇಂದ್ರ ಮೋದಿ ಅವರಿಗೆ ಆಯುರಾರೋಗ್ಯ ಹಾಗೂ ದೀರ್ಘಾಯುಷ್ಯ ದೊರೆಯಲಿ. ಭಾರತವನ್ನು ಜಾಗತಿಕವಾಗಿ ಇನ್ನಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ಮುನ್ನಡೆಸಲು ಅವರಿಗೆ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಜಗದೀಶ್ ಎನ್ ಕೆ., ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಜಿಲ್ಲಾ ಉಪಾಧ್ಯಕ್ಷರಾದ ಜ್ಞಾನೇಶ್ವರ್ ಎನ್.ಜಿ. ಮತ್ತು ನಾಗರಾಜ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಕೆ. ನವಲೆ ಹಾಗೂ ದಿನದಯಾಳು, ನಗರ ಪ್ರಭಾರಿ ಕುಪೇಂದ್ರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.