ಯುವತಿಯರು ವಿದ್ಯಾಭ್ಯಾಸದ ಜತೆಯಲ್ಲಿ ಹದಿಹರೆಯದ ವಯಸ್ಸಿನಲ್ಲಿ ಆರೋಗ್ಯ ಮತ್ತು ವೈಯುಕ್ತಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ವೈದ್ಯರಾದ ಡಾ. ಸ್ವಾತಿ ಹೇಳಿದರು.
ತ್ಯಾಜವಳ್ಳಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ “ಆರೋಗ್ಯ ಮಾಹಿತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಬಾಲಕಿಯರು 12 ವರ್ಷ ದಾಟಿದ ನಂತರದಲ್ಲಿ ದೇಹದಲ್ಲಿ ಅನೇಕ ಬದಲಾವಣೆ ಆಗುತ್ತಿರುತ್ತದೆ. ಮನಸ್ಸಿನ ಭಾವನೆಗಳಲ್ಲಿ ಅನೇಕ ಆಲೋಚನೆಗಳು ಮೂಡಿಬರುತ್ತಿದೆ. ಮನಸ್ಸಿನಲ್ಲಿ ಮೂಡುವ ಆಲೋಚನೆಗಳನ್ನು ನಿಯಂತ್ರಿಸಿಕೊoಡು ವೈಯುಕ್ತಿಕ ಆರೋಗ್ಯದ ಕಡೆಗೂ ಗಮನ ಕೊಡಬೇಕು ಎಂದು ಸಲಹೆ ನೀಡಿದರು.
ಡಾ. ಅಮೀನಾ ಮಾತನಾಡಿ, ವಿದ್ಯಾರ್ಥಿನಿಯರು ಉತ್ತಮ ಜೀವನ ಕೌಶಲ್ಯಗಳನ್ನು ರೂಢಿಸಿಕೊಳ್ಳುವುದರ ಜತೆಯಲ್ಲಿ ಪ್ರತಿ ನಿತ್ಯ ನಿರಂತರ ವ್ಯಾಯಮ, ಯೋಗಾಭ್ಯಾಸ, ಪ್ರಾಣಾಯಮಗಳನ್ನು ಮಾಡಬೇಕು. ಪೋಷಕಾಂಶಯುಕ್ತ ಆಹಾರ ಸೇವನೆ ಮಾಡಬೇಕು ಎಂದು ಹೇಳಿದರು.
ಪ್ರೌಢಾವಸ್ಥೆಯಲ್ಲಿ ಯಾವುದೇ ರೀತಿಯ ಆಸೆ, ಆಮಿಷ, ಆಕರ್ಷಣೆಗೆ ಒಳಗಾಗಬಾರದು. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬೇಕು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಏನಾದರೂ ಗೊಂದಲಗಳಿದ್ದಲ್ಲಿ ವೈದ್ಯರ ಸಲಹೆ ಮತ್ತು ಮಾರ್ಗದರ್ಶನ ಪಡೆಯಬೇಕು ಎಂದು ತಿಳಿಸಿದರು.
ಆರೋಗ್ಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಯಂತಿ ವಾಲಿ ಮಾತನಾಡಿದರು. ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ಮಾಜಿ ಅಧ್ಯಕ್ಷೆ ವೀಣಾ ಹರ್ಷ, ರಾಜೇಶ್ವರಿ ಪ್ರತಾಪ್, ಸುನಂದಾ ಜಗದೀಶ್, ಮಮತಾ ಸುಧೀಂದ್ರ ಹಾಗೂ ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸದಸ್ಯೆಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153