ಶಿವಮೊಗ್ಗ ನ್ಯೂಸ್…

ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವ ಎಲ್ಲರ ಆಶೀರ್ವಾದವೇ ಕಸಾಪ ಚುನಾವಣೆಯಲ್ಲಿ ಗೆಲುವಿಗೆ ಕಾರಣವಾಗಿದೆ. ಕನ್ನಡದ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶ ಸಿಕ್ಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಚುನಾಯಿತ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಡಿ.ಮಂಜುನಾಥ್ ಅವರಿಗೆ ನಿವಾಸದಲ್ಲಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡದ ಕಾರ್ಯ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಬೇಕು. ಮುಂದಿನ ದಿನಗಳಲ್ಲಿ ಒಳ್ಳೆಯ ಕೆಲಸಗಳನ್ನು ಎಲ್ಲರೂ ಒಟ್ಟುಗೂಡಿ ಮಾಡೋಣ ಎಂದು ತಿಳಿಸಿದರು.
ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಮುಖಾಂತರ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಮತ್ತು ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ಕಟ್ಟುವ ಕೆಲಸ ನಿರಂತರವಾಗಿರುತ್ತದೆ. ಎಲ್ಲರ ಪಾಲ್ಗೊಳ್ಳುವಿಕೆಯಿಂದ ಹೆಚ್ಚಿನ ಕಾರ್ಯಗಳನ್ನು ನಡೆಸುತ್ತೇನೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಯುವಜನರು ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳುವಂತೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ವೇದಿಕೆಗಳನ್ನು ಕಲ್ಪಿಸಿಕೊಡುವ ಮೂಲಕ ಕನ್ನಡದ ಸಮ್ಮೇಳನಗಳನ್ನು ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದರು.
ರೋಟರಿ ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ವಸಂತ್ ಹೋಬಳಿದಾರ್, ಮಾಜಿ ಅಧ್ಯಕ್ಷ ಮಹೇಶ್, ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಸತೀಶ್‌ಚಂದ್ರ, ಮಲ್ಲಿಕಾರ್ಜುನ್ ಕಾನೂರ್, ಅನೂಷ್ ಗೌಡ, ಸಂತೋಷ್, ಸತೀಶ್‌ನಾಯ್ಕ್, ಸ್ವಾಮಿ, ಶಿವಮೂರ್ತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…